ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜನವರಿ 10 ರಿಂದ 12 ರವರೆಗೆ ಗುಜರಾತ್ಗೆ ಭೇಟಿ ನೀಡಲಿದ್ದಾರೆ. ಪ್ರಧಾನಮಂತ್ರಿ ಅವರು ಜನವರಿ 10 ರಂದು ಸಂಜೆ ಸೋಮನಾಥಕ್ಕೆ ಆಗಮಿಸಲಿದ್ದಾರೆ ಮತ್ತು ರಾತ್ರಿ 8 ಗಂಟೆ ಸುಮಾರಿಗೆ ಪ್ರಧಾನಮಂತ್ರಿ ಓಂಕಾರ ಮಂತ್ರ ಪಠಣದಲ್ಲಿ ಭಾಗವಹಿಸಲಿದ್ದಾರೆ ಮತ್ತು ನಂತರ ಅವರು ಸೋಮನಾಥ ದೇವಾಲಯದಲ್ಲಿ ಡ್ರೋಣ್ ಪ್ರದರ್ಶನವನ್ನು ವೀಕ್ಷಿಸಲಿದ್ದಾರೆ.
ಜನವರಿ 11 ರಂದು ಬೆಳಿಗ್ಗೆ 9:45 ರ ಸುಮಾರಿಗೆ ಪ್ರಧಾನಮಂತ್ರಿ ಸೋಮನಾಥ ದೇವಾಲಯವನ್ನು ರಕ್ಷಿಸುವಲ್ಲಿ ಪ್ರಾಣ ತ್ಯಾಗ ಮಾಡಿದ ಅಸಂಖ್ಯಾತ ಯೋಧರನ್ನು ಗೌರವಿಸಲು ಆಯೋಜಿಸಲಾದ ವಿಧ್ಯುಕ್ತ ಮೆರವಣಿಗೆಯಾದ ಶೌರ್ಯ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಬೆಳಿಗ್ಗೆ 10:15 ರ ಸುಮಾರಿಗೆ ಪ್ರಧಾನಮಂತ್ರಿ ಸೋಮನಾಥ ದೇವಾಲಯದಲ್ಲಿ ವಿಶೇಷ ದರ್ಶನ ಮತ್ತು ಪೂಜೆ ಸಲ್ಲಿಸಲಿದ್ದಾರೆ. ಬೆಳಿಗ್ಗೆ 11 ಗಂಟೆ ಸುಮಾರಿಗೆ ಪ್ರಧಾನಮಂತ್ರಿ ಸೋಮನಾಥ ಸ್ವಾಭಿಮಾನ ಪರ್ವದ ಅಂಗವಾಗಿ ಆಯೋಜಿಸಿರುವ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಆನಂತರ ಪ್ರಧಾನಮಂತ್ರಿ ಅವರು ಕಛ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ನಡೆಯುವ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನದಲ್ಲಿ ಭಾಗವಹಿಸಲು ರಾಜ್ಕೋಟ್ಗೆ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ 1:30 ರ ಸುಮಾರಿಗೆ ಅವರು ಸಮ್ಮೇಳನದಲ್ಲಿ ವ್ಯಾಪಾರ ಮೇಳ ಮತ್ತು ವಸ್ತು ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಪ್ರಧಾನಮಂತ್ರಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ರಾಜ್ಕೋಟ್ನ ಮಾರ್ವಾಡಿ ವಿಶ್ವವಿದ್ಯಾಲಯದಲ್ಲಿ ಕಛ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ ಮತ್ತು ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಬಳಿಕ ಪ್ರಧಾನಮಂತ್ರಿ ಅವರು ರಾಜ್ಕೋಟ್ನಿಂದ ಅಹಮದಾಬಾದ್ಗೆ ಪ್ರಯಾಣ ಬೆಳೆಸಲಿದ್ದಾರೆ. ಸಂಜೆ 5:15ರ ಸುಮಾರಿಗೆ ಮಹಾತ್ಮಾ ಮಂದಿರ ಮೆಟ್ರೋ ನಿಲ್ದಾಣದಲ್ಲಿ ಪ್ರಧಾನಮಂತ್ರಿ ಅವರು ಸೆಕ್ಟರ್ 10ಎ ನಿಂದ ಮಹಾತ್ಮಾ ಮಂದಿರದವರೆಗಿನ ಅಹಮದಾಬಾದ್ ಮೆಟ್ರೋದ 2 ನೇ ಹಂತದ ಉಳಿದ ಭಾಗವನ್ನು ಉದ್ಘಾಟನೆ ಮಾಡಲಿದ್ದಾರೆ.
ಪ್ರಧಾನಮಂತ್ರಿ ಅವರು ಜನವರಿ 12 ರಂದು ಅಹಮದಾಬಾದ್ನಲ್ಲಿ ಜರ್ಮನಿಯ ಫೆಡರಲ್ ಚಾನ್ಸೆಲರ್ ಗೌರವಾನ್ವಿತ ಶ್ರೀ ಫ್ರೆಡ್ರಿಕ್ ಮೆರ್ಜ್ ಅವರನ್ನು ಭೇಟಿ ಮಾಡಲಿದ್ದಾರೆ. ಬೆಳಿಗ್ಗೆ 9:30 ರ ಸುಮಾರಿಗೆ ಉಭಯ ನಾಯಕರು ಸಬರಮತಿ ಆಶ್ರಮಕ್ಕೆ ಭೇಟಿ ನೀಡಲಿದ್ದಾರೆ, ಆನಂತರ ಬೆಳಿಗ್ಗೆ 10 ಗಂಟೆಗೆ ಸಬರಮತಿ ನದಿ ದಂಡೆಯಲ್ಲಿ ನಡೆಯುವ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವದಲ್ಲಿ ಭಾಗವಹಿಸಲಿದ್ದಾರೆ.
ಆನಂತರ ಬೆಳಿಗ್ಗೆ 11:15 ರಿಂದ ಗಾಂಧಿನಗರದ ಮಹಾತ್ಮಾ ಮಂದಿರದಲ್ಲಿ ದ್ವಿಪಕ್ಷೀಯ ಮಾತುಕತೆಗಳು ನಡೆಯಲಿದ್ದು, ಅಲ್ಲಿ ಪ್ರಧಾನಮಂತ್ರಿ ಮತ್ತು ಜರ್ಮನ್ ಚಾನ್ಸೆಲರ್ ಇತ್ತೀಚೆಗೆ 25 ವರ್ಷಗಳನ್ನು ಪೂರೈಸಿದ ಭಾರತ-ಜರ್ಮನಿ ಕಾರ್ಯತಾಂತ್ರಿಕ ಪಾಲುದಾರಿಕೆಯಲ್ಲಿ ಆಗಿರುವ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.


